ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ನಾಳೆಯಿಂದಲೇ ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಈಗಾಗಲೇ ಹಣ ಕೊಟ್ಟು ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಪಾವತಿಸಿದ ದುಡ್ಡನ್ನು ಸಂಪೂರ್ಣವಾಗಿ ವಾಪಸ್ ನೀಡಲು ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಕುರಿತು ಇಂದು ಸಂಜೆಯೊಳಗೆ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಬೀಳಲಿದೆ. ಮುಖ್ಯಮಂತ್ರಿಗಳು ಉಚಿತ ಪ್ರಯಾಣದ ಘೋಷಣೆ ಮಾಡಿದ ನಂತರವೂ ವಿದ್ಯಾರ್ಥಿಗಳು ಬಸ್ಗಳಲ್ಲಿ ಹಣ ಕೊಟ್ಟು ಪ್ರಯಾಣಿಸುತ್ತಿದ್ದ ಬಗ್ಗೆ ಮಾಧ್ಯಮಗಳು ವಿಸ್ತೃತವಾಗಿ ವರದಿ ಮಾಡಿದ್ದವು. ಈ ವರದಿಗಳ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ ದಿಢೀರ್ ಆದೇಶ ಹೊರಡಿಸಲು ಸಜ್ಜಾಗಿದೆ.

ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಸಿಗುತ್ತಿಲ್ಲ ಹಾಗೂ ಅವರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ವಾಸ್ತವಾಂಶವನ್ನು ಮಾಧ್ಯಮಗಳು ಸರ್ಕಾರದ ಗಮನಕ್ಕೆ ತಂದಿದ್ದವು. ಈ ಬಗ್ಗೆ ತ್ವರಿತವಾಗಿ ಸ್ಪಂದಿಸಿರುವ ಸರ್ಕಾರ ಹಾಗೂ ಸಾರಿಗೆ ಇಲಾಖೆ, ಫ್ರೀ ಬಸ್ ಪಾಸ್ ಕುರಿತು ಇಂದು ಸಂಜೆ ಅಧಿಕೃತ ಆದೇಶ ಪ್ರಕಟಿಸಲಿದೆ.
ಪ್ರಸ್ತುತ ಉಚಿತ ಬಸ್ ಪಾಸ್ ಕಾರ್ಡ್ಗಳ ಮುದ್ರಣ ಹಾಗೂ ಹಂಚಿಕೆ ಪ್ರಕ್ರಿಯೆಗೆ 3-4 ದಿನಗಳ ಸಮಯಾವಕಾಶ ಬೇಕಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ, ಶಾಲಾ-ಕಾಲೇಜುಗಳಿಗೆ ಉಚಿತ ಹಾಗೂ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಇಲಾಖೆ ಅಗತ್ಯ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಿದೆ.




Leave a Reply