ಬೆಂಗಳೂರು: ಬೆಂಗಳೂರು ಜಲಮಂಡಳಿ (BWSSB) ನಿರ್ವಹಣಾ ವಿಭಾಗದ ಮುಖ್ಯ ಎಂಜಿನಿಯರ್ (Chief Engineer) ದೇವರಾಜ್ ಅವರಿಗೆ ಅಕ್ರಮ ಆಸ್ತಿ ಸಂಪಾದನೆಯ ದೊಡ್ಡ ಕಂಟಕ ಎದುರಾಗಿದೆ. ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ, ಸರ್ಕಾರದ ಯಾವುದೇ ಮುನ್ಸೂಚನೆ ಅಥವಾ ಅನುಮತಿ ಇಲ್ಲದೆ ತಮ್ಮ ಕುಟುಂಬಸ್ಥರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಲಮಂಡಳಿ ಅಧ್ಯಕ್ಷರಿಗೆ ದಾಖಲೆ ಸಮೇತ ಲಿಖಿತ ದೂರನ್ನು ಸಲ್ಲಿಸಲಾಗಿದೆ.
ದೂರಿನ ಪ್ರಕಾರ, ಚೀಫ್ ಎಂಜಿನಿಯರ್ ದೇವರಾಜ್ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದನಗೂರು ಹಲಸಹಳ್ಳಿ ಗ್ರಾಮದ ಸರ್ವೆ ನಂಬರ್ 38/2ರಲ್ಲಿ ಕನಿಷ್ಠ ₹3 ಕೋಟಿಗೂ ಅಧಿಕ ಮೌಲ್ಯದ 3 ಎಕರೆ ಜಮೀನನ್ನು ತಮ್ಮ ಪತ್ನಿಯ ಹೆಸರಿನಲ್ಲಿ ಕಾನೂನುಬಾಹಿರವಾಗಿ ಖರೀದಿ ಮಾಡಿದ್ದಾರೆ ಎನ್ನಲಾಗಿದೆ. ಕೆಸಿಎಸ್ (KCS) ನಡವಳಿಕೆ ನಿಯಮಾವಳಿಗಳ ಪ್ರಕಾರ ಯಾವುದೇ ಸರ್ಕಾರಿ ಉನ್ನತ ಅಧಿಕಾರಿಗಳು ಸರ್ಕಾರದ ಅನುಮತಿಯಿಲ್ಲದೆ ಕುಟುಂಬಸ್ಥರ ಹೆಸರಿನಲ್ಲಿ ಇಷ್ಟು ದೊಡ್ಡ ಮೊತ್ತದ ಆಸ್ತಿ ಖರೀದಿ ಮಾಡುವಂತಿಲ್ಲವಾದ್ದರಿಂದ, ಜಲಮಂಡಳಿ ಸಿಇ ದೇವರಾಜ್ ವಿರುದ್ಧ ಇಲಾಖಾ ತನಿಖೆ ಹಾಗೂ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ದಟ್ಟವಾಗಿದೆ.



Leave a Reply