ರಾಜ್ಯ ರಾಜಕಾರಣದಲ್ಲಿ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅತ್ಯಂತ ವಿವಾದಾತ್ಮಕ ಹಾಗೂ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಯತ್ನಾಳ್ ಅವರನ್ನು ಏಕವಚನದಲ್ಲೇ ನಿಂದಿಸಿರುವ ಪ್ರದೀಪ್ ಈಶ್ವರ್, ಅವರನ್ನು ‘ಕೋತಿಯ ಬ್ರೀಡ್’ಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಹಾಗೂ ತಮ್ಮನ್ನು ‘ದೇಶದ್ರೋಹಿ’ ಎಂದು ಕರೆದು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಛಲವಾದಿ ನಾರಾಯಣಸ್ವಾಮಿ ಅವರು ಪ್ರದೀಪ್ ಈಶ್ವರ್ ವಿರುದ್ಧ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ದೂರು ನೀಡಿದ್ದರು. ಅಲ್ಲದೆ, ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರದೀಪ್ ಈಶ್ವರ್, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರನ್ನು ತಾವು ಪ್ರಜ್ಞಾವಂತರು ಎಂದು ಭಾವಿಸಿದ್ದಾಗಿ ಹೇಳಿದ ಅವರು, ಭಾಷಣದ ವಿಡಿಯೋವನ್ನು ಸಂಪೂರ್ಣವಾಗಿ ನೋಡದೆ ದೂರು ನೀಡಿರುವುದು ಅವರ ಅಜ್ಞಾನವನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ತಮ್ಮ ಭಾಷಣದಲ್ಲಿ, “ಅಂಧಭಕ್ತರು ಮತ್ತು ದೇಶದ್ರೋಹಿಗಳು ಈ ದೇಶಕ್ಕೆ ಮಾರಕ” ಎಂದು ಮಾತ್ರ ಹೇಳಿದ್ದೇನೆಯೇ ಹೊರತು, ನಿರ್ದಿಷ್ಟವಾಗಿ ಯಾರನ್ನೂ ಉದ್ದೇಶಿಸಿ ದೇಶದ್ರೋಹಿಗಳು ಎಂದು ಕರೆದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರು ಕೇವಲ ತಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಹೊರಹಾಕುತ್ತಿದ್ದಾರಷ್ಟೇ ಎಂದು ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.
ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ
ತಮ್ಮ ವಿರುದ್ಧದ ದ್ವೇಷ ಭಾಷಣದ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ, ವಾಸ್ತವದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರೇ ದ್ವೇಷ ಭಾಷಣದ ಮೊದಲ ಪಿತಾಮಹ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಎರಡನೇ ಪಿತಾಮಹ ಎಂದು ಕಟುವಾಗಿ ಟೀಕಿಸಿದರು.
ಮಾತು ಮುಂದುವರಿಸಿದ ಅವರು ಯತ್ನಾಳ್ ವಿರುದ್ಧ ತೀವ್ರ ಸ್ವರೂಪದ ವೈಯಕ್ತಿಕ ದಾಳಿ ನಡೆಸಿದರು. ಆ ಯತ್ನಾಳ್ ನೋಡಿದರೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾನೆ, ಆತನ ವರ್ತನೆ ನೋಡಿದರೆ ಅದು ಯಾವುದೋ ಒಂದು ‘ಕೋತಿಯ ಬ್ರೀಡ್’ ಇರಬೇಕು ಎಂದು ಏಕವಚನದಲ್ಲಿ ನಿಂದಿಸುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.




Leave a Reply