ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿ ಗಂಡ (ಬಾವ) ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಕಮಿಷನರ್ ಆಗಿರುವ ವೈ. ಮಂಜುನಾಥ್ ಅವರನ್ನು ಕೊನೆಗೂ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಪ್ರತಿಷ್ಠಿತ ‘ಸಮಿಟ್ ಅಪಾರ್ಟ್ಮೆಂಟ್’ನಲ್ಲಿ (Summit Apartment) ಬೀಡುಬಿಟ್ಟಿದ್ದ ಮಂಜುನಾಥ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿದೇಶಿ ಅಕ್ರಮ ಹಣಕಾಸು ವ್ಯವಹಾರ (Foreign Illegal Financial Transactions) ಹಾಗೂ ಬೃಹತ್ ಮಟ್ಟದ ಹವಾಲಾ ಲಿಂಕ್ (Hawala Link) ಹೊಂದಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಾವಿ ಮತ್ತು ಬೆಂಗಳೂರು ಸೇರಿದಂತೆ ವೈ. ಮಂಜುನಾಥ್ ಅವರಿಗೆ ಸೇರಿದ ನಿವಾಸಗಳು ಹಾಗೂ ಅವರ ಆಪ್ತರ ಒಟ್ಟು ಆರು ಪ್ರಮುಖ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು.

ಸ್ಥಳಕ್ಕೆ ದೌಡಾಯಿಸಿದ ಡಿವೈಎಸ್ಪಿ: ದಾಳಿಯ ವೇಳೆ ಮಂಜುನಾಥ್ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದ ಅತ್ಯಂತ ಮಹತ್ವದ ದಾಖಲೆಗಳು (Crucial Documents) ಪತ್ತೆಯಾಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಇಡಿ ಡಿವೈಎಸ್ಪಿ (ED DySP) ದರ್ಜೆಯ ಹಿರಿಯ ಅಧಿಕಾರಿಯೊಬ್ಬರು ಬೆಳಗಾವಿಯ ದೂರದರ್ಶನ ನಗರದಲ್ಲಿರುವ ಮಂಜುನಾಥ್ ಅವರ ಮುಖ್ಯ ನಿವಾಸಕ್ಕೆ ತಡರಾತ್ರಿಯೇ ದೌಡಾಯಿಸಿದ್ದಾರೆ. ಸದ್ಯ ಸಿಕ್ಕಿರುವ ತಾಂತ್ರಿಕ ಸಾಕ್ಷ್ಯಗಳು ಹಾಗೂ ದಾಖಲೆಗಳ ಆಧಾರದ ಮೇಲೆ ಮಂಜುನಾಥ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಇಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ಮುಂದುವರಿದಿದೆ.


Leave a Reply