ಭಾರತಕ್ಕೆ ಆಗಮಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ಅಧಿಕೃತ ಪೋರ್ಟಲ್ ಮೂಲಕ ‘ಏರ್ ಸುವಿಧಾ 2.0’ (Air Suvidha 2.0) ಸ್ವಯಂ ಘೋಷಣಾ ಅರ್ಜಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಸೂಚನೆ ಮೇರೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಕಟಣೆ ಹೊರಡಿಸಿದೆ.
ಪ್ರಯಾಣಿಕರು ಭಾರತಕ್ಕೆ ಆಗಮಿಸುವ 24 ಗಂಟೆಗಳ ಮೊದಲು, ಅಂದರೆ ವಿಮಾನ ಹತ್ತುವ ಮುನ್ನವೇ ಈ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ತಪಾಸಣೆ ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ವಲಸೆ (Immigration) ಅಥವಾ ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆಗೆ ಅನುಕೂಲವಾಗುವಂತೆ ಡೌನ್ಲೋಡ್ ಮಾಡಿದ ಘೋಷಣಾ ಪತ್ರದ ಪ್ರತಿಯನ್ನು ಸಿದ್ಧವಾಗಿಟ್ಟುಕೊಳ್ಳುವುದು ಕಡ್ಡಾಯವಾಗಿದೆ.
ಬೆಂಗಳೂರು ಸೇರಿದಂತೆ ಭಾರತದ ಯಾವುದೇ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಯಾವುದೇ ರೀತಿಯ ಗೊಂದಲಗಳಾಗದಂತೆ ತಡೆಯಲು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದು, ನೇರವಾಗಿ ಪೋರ್ಟಲ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಸಹ ಒದಗಿಸಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಈ ಹೊಸ ನಿಯಮವನ್ನು ಪಾಲಿಸುವ ಮೂಲಕ ವಿಮಾನ ನಿಲ್ದಾಣದಲ್ಲಿ ಸುಗಮ ಪ್ರವೇಶ ಪಡೆಯುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply