ಬಳ್ಳಾರಿಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ – ಗುಂಡಿಗೆ ಬಿದ್ದು ನರ್ಸ್ ಸಾವು, ಪತಿಗೆ ಗಂಭೀರ ಗಾಯ!

ಹಂಚಿಕೊಳ್ಳಿ

ಬಳ್ಳಾರಿ: ಜಿಲ್ಲೆಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿಗಾಗಿ ತೋಡಲಾಗಿದ್ದ ಗುಂಡಿಯನ್ನು ಸರಿಯಾಗಿ ಮುಚ್ಚದ ಕಾರಣ, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗಳು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದ್ದಾರೆ. ಈ ಭೀಕರ ಅವಘಡದಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಾಣಕನೂರು ಕ್ರಾಸ್ ಬಳಿಯ ರಾಜ್ಯ ಹೆದ್ದಾರಿ 63ರಲ್ಲಿ ನಡೆದಿದೆ.

ದುರಂತದಲ್ಲಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯನ್ನು ಮಂಜುಳ (36) ಎಂದು ಗುರುತಿಸಲಾಗಿದೆ. ಅವರ ಪತಿ ಚಂದ್ರಶೇಖರ (46) ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದಂಪತಿಗಳು ರಾವಿಹಾಳ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನರ್ಸ್ (ಶುಶ್ರೂಷಕರು) ಆಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ನಿನ್ನೆ ರಾತ್ರಿ ತಮ್ಮ ಕಠಿಣ ಕರ್ತವ್ಯವನ್ನು ಮುಗಿಸಿ, ಬೈಕ್‌ನಲ್ಲಿ ಹೆದ್ದಾರಿ ಮೂಲಕ ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ರಾಜ್ಯ ಹೆದ್ದಾರಿ 63ರಲ್ಲಿ ರಸ್ತೆ ಕಾಮಗಾರಿ ನಡೆಸಲಾಗುತ್ತಿತ್ತು. ಆದರೆ, ಕಾಮಗಾರಿಗಾಗಿ ರಸ್ತೆಯ ಮಧ್ಯದಲ್ಲೇ ತೆಗೆದಿದ್ದ ದೊಡ್ಡ ಗುಂಡಿಯನ್ನು ಮುಚ್ಚದೇ, ಯಾವುದೇ ಮುನ್ನೆಚ್ಚರಿಕೆ ಫಲಕಗಳನ್ನೂ ಹಾಕದೇ ಹಾಗೆಯೇ ಬಿಡಲಾಗಿತ್ತು. ಕತ್ತಲಿನಲ್ಲಿ ದಂಪತಿಗಳು ಬರುತ್ತಿದ್ದ ಬೈಕ್ ನೇರವಾಗಿ ಈ ಆಳವಾದ ಗುಂಡಿಗೆ ಬಿದ್ದಿದೆ. ಬಿದ್ದ ರಭಸಕ್ಕೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಮಂಜುಳಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಚಂದ್ರಶೇಖರ್ ಅವರನ್ನು ತಕ್ಷಣವೇ ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಿರುಗುಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಸ್ಥಳೀಯ ಸಾರ್ವಜನಿಕರು ಹಾಗೂ ರೋಗಿಗಳ ಸಂಬಂಧಿಕರು ಹೆದ್ದಾರಿ ಪ್ರಾಧಿಕಾರ ಮತ್ತು ಗುತ್ತಿಗೆದಾರರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds