ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತರು ಸಲ್ಲಿಸಿದ್ದ ಕಡತವನ್ನು ರಾಜ್ಯಪಾಲರು ಹಿಂದಿರುಗಿಸಿದ್ದಾರೆ. ಪ್ರಕರಣದ ಬಹುತೇಕ ದಾಖಲೆಗಳು ಕನ್ನಡ ಭಾಷೆಯಲ್ಲಿಯೇ ಇರುವ ಕಾರಣ, ಕಡತವನ್ನು ವಾಪಸ್ ಕಳಿಸಲಾಗಿದೆ.
ಕನ್ನಡದಲ್ಲಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಅನುವಾಗುವಂತೆ, ಅವುಗಳನ್ನು ಇಂಗ್ಲಿಷ್ ಭಾಷೆಗೆ ತರ್ಜುಮೆ ಮಾಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಎಲ್ಲಾ ದಾಖಲೆಗಳನ್ನು ಇಂಗ್ಲಿಷ್ಗೆ ಭಾಷಾಂತರಿಸಿ ಮರಳಿ ರಾಜಭವನಕ್ಕೆ ಕಳುಹಿಸಿಕೊಡುವಂತೆ ಲೋಕಾಯುಕ್ತ ಕಚೇರಿಗೆ (ಲೋಕಭವನಕ್ಕೆ) ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ಜಮೀರ್ ಅಹ್ಮದ್ ವಿರುದ್ಧದ ಈ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಜರುಗಿಸಲು ಹಾಗೂ ವಿಚಾರಣೆ ನಡೆಸಲು ರಾಜ್ಯಪಾಲರ ಅನುಮತಿ ಅತ್ಯಗತ್ಯವಾಗಿದೆ. ಇದೀಗ ದಾಖಲೆಗಳ ಭಾಷಾಂತರ ಪ್ರಕ್ರಿಯೆ ಸಂಪೂರ್ಣಗೊಂಡ ಬಳಿಕವಷ್ಟೇ ಲೋಕಾಯುಕ್ತ ಅಧಿಕಾರಿಗಳು ಇಂಗ್ಲಿಷ್ ಕಡತವನ್ನು ಮರಳಿ ರಾಜಭವನಕ್ಕೆ ಸಲ್ಲಿಕೆ ಮಾಡಲಿದ್ದಾರೆ. ತದನಂತರವಷ್ಟೇ ಪ್ರಾಸಿಕ್ಯೂಷನ್ ಅನುಮತಿಯ ಕುರಿತು ಅಂತಿಮ ನಿರ್ಧಾರ ಹೊರಬೀಳಲಿದೆ.

Leave a Reply